ಉಡುಪಿ: ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸುವ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯು ಅತೀ ಪ್ರಾಮುಖ್ಯ ದಾಖಲೆಯಾಗಿದ್ದು, ಎಲ್ಲಾ ಇಲಾಖಾಧಿಕಾರಿಗಳು ಇದರ ತಯಾರಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂಬಂಧಿಸಿದ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುವುದರೊಂದಿಗೆ ಗ್ರಾಮ ಪಂಚಾಯತ್ ಹಂತದಿಂದಲೇ ಮಾನವ ಅಭಿವೃದ್ಧಿಗೆ ಒತ್ತು ನೀಡುವಂತದ್ದಾಗಿರಬೇಕು ಎಂದರು.
ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ – 2031 ವರದಿಗಾಗಿ ಹಲವು ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಶಿಕ್ಷಣ, ಆರೋಗ್ಯ, ಪೋಷಣಾ ಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ. ಅಧಿಕಾರಿಗಳು, ದತ್ತಾಂಶ ಸಂಗ್ರಹ, ವಿಶ್ಲೇಷಣೆ, ಇಲಾಖಾವಾರು ಸಹಕಾರದೊಂದಿಗೆ ಮಾಹಿತಿಯನ್ನು ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯ ಅಭಿವೃದ್ಧಿಗೆ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆ ಅಗತ್ಯ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿ ನೀಡುವಾಗ ಎಲ್ಲಾ ಇಲಾಖೆಗಳು ಸಂಬಂಧಪಟ್ಟ ಮಾಹಿತಿಯೊಂದಿಗೆ ಭಾಗವಹಿಸಬೇಕು. ಇದರೊಂದಿಗೆ ಫೀಡ್ ಬ್ಯಾಕ್ಗಳನ್ನು ಸಹ ನೀಡಬೇಕು ಎಂದರು.
ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಹೆಚ್ಚಿನ ಬೇಡಿಕೆ ಇದ್ದು, ಇದು ಭವಿಷ್ಯದ ಯೋಜನೆಗಳನ್ನು ರೂಪಿಸಲು ರೆಫರ್ ಮಾಡಬಹುದಾಗಿದೆ. ಈ ಸಾಲಿನ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಭಿನ್ನವಾಗಿದ್ದು, ಸುಸ್ಥಿರ ಅಭಿವೃದ್ಧಿ ಬೆಳವಣಿಗೆ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಜನಸಾಮಾನ್ಯರಿಗೆ ಅವರ ಕೈಗೆಟುವ ಹಾಗೆ ಹೆಚ್ಚಿನ ಆಯ್ಕೆಗಳಿದ್ದಲ್ಲಿ ಮಾನವ ಅಭಿವೃದ್ಧಿ ಸಾಧ್ಯವಾಗಲಿದೆ. ಶಿಕ್ಷಣ, ಆರೋಗ್ಯ, ಜನರ ಜೀವನ ಮಟ್ಟದ ಮೇಲೆ ಅಭಿವೃದ್ಧಿಯ ಅಂಶಗಳು ಒಳಪಟ್ಟಿವೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಜಂಟಿ ನಿರ್ದೇಶಕ (ನಿ) ಶ್ರೀನಿವಾಸ್ ರಾವ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹ್ವತ್ವವಾದ ಮೌಲ್ಯವಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾಗಿ ಸ್ಪಷ್ಟ ಮಾಹಿತಿ ನೀಡಿದ್ದಲ್ಲಿ ಇದು ಜಿಲ್ಲೆಯು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಯೋಜನೆ ರೂಪಿಸುವಾಗ ಎದುರಾಗುವ ಸಮಸ್ಯೆಗಳನ್ನು ಸಹ ತಿಳಿಸಬಹುದು. ಹೊಸ ವಿನೂತನ ಯೋಜನೆಗಳನ್ನೂ ಸಹ ಗುರುತಿಸಿ, ಮಾಹಿತಿ ನೀಡಬಹುದು. ಜೊತೆಗೆ ವರದಿಯೊಂದಿಗೆ ಜನರನ್ನು ಆಕರ್ಷಿಸುವಂತಹ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ನೀಡಿದ್ದಲ್ಲಿ ವರದಿಗೆ ಹೆಚ್ಚಿನ ಮಹತ್ವ ದೊರೆಯಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್, ಯೋಜನೆಯ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
