ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಆಗಸ್ಟ್ 07: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಪಥಸಂಚಲನಕ್ಕೆ ಸಂಬಂಧಿಸಿದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸ್ವಚ್ಛತೆ, ಪರಿಸರ ಸಂರಕ್ಷಣೆ, ಸ್ವಾಸ್ಥ್ಯ ಉಡುಪಿ, ಪ್ರವಾಸೋದ್ಯಮ ಕುರಿತು ಸಂದೇಶ ಸಾರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ಗಣ್ಯರನ್ನು ಸನ್ಮಾನ ಮಾಡಲಾಗುವುದು ಹಾಗೂ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ಸುರಕ್ಷತೆ, ಆಸನದ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಪೂರೈಕೆ, ಶೌಚಾಲಯ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು, ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ, ಉಪಸಮಿತಿಗಳು ತಮಗೆ ವಹಿಸಿರುವ ಕಾರ್ಯಗಳು ಸಮರ್ಪಕವಾಗಿ ಹಾಗೂ ಅಚ್ಚುಕಟ್ಟಾಗಿ ಮಾಡುವಂತೆ ಸೂಚನೆ ನೀಡಿದ ಅವರು, ಸಾರ್ವಜನಿಕರು ರಾಷ್ಟ್ರೀಯ ಹಬ್ಬವಾದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಡಿ.ಹೆಚ್.ಓ ಬಸವರಾಜ್ ಹುಬ್ಬಳ್ಳಿ, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‍ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *