ರ್ಯಾಗಿಂಗ್ ಮುಕ್ತ ಕ್ಯಾಂಪಸ್ ನಿರ್ಮಾಣ ಎಲ್ಲರ ಹೊಣೆ: ಪೊಲೀಸ್ ಅಧಿಕಾರಿ ಪ್ರತಿಭಾ

ಮೂಡುಬಿದಿರೆ: ರ್ಯಾಗಿಂಗ್ ಮುಕ್ತ ಹಾಗೂ ಸುರಕ್ಷಿತ ಕ್ಯಾಂಪಸ್ ನಿರ್ಮಿಸುವುದು ಕೇವಲ ಸಂಸ್ಥೆಯ ಜವಾಬ್ದಾರಿಯಲ್ಲ; ವಿದ್ಯಾರ್ಥಿಗಳು, ಉಪನ್ಯಾಸಕರು, ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಉಪ ಪೊಲೀಸ್ ನಿರೀಕ್ಷಕಿ ಪ್ರತಿಭಾ ಹೇಳಿದರು.

ಇಲ್ಲಿನ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸೆಲ್, ಎನ್‍ಎಸ್‍ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ, ಆ್ಯಂಟಿ ರ್ಯಾಗಿಂಗ್ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ‘ರ್ಯಾಗಿಂಗ್ ಮುಕ್ತ ಕ್ಯಾಂಪಸ್’ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಪರಸ್ಪರ ಗೌರವ, ಸ್ನೇಹಭಾವ ಹಾಗೂ ಸಹಬಾಳ್ವೆಯ ಮನೋಭಾವ ಅತ್ಯಂತ ಮುಖ್ಯ. ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ತಮ್ಮ ಸಹಪಾಠಿಗಳಂತೆ ಗೌರವದಿಂದ ಕಾಣಬೇಕು. ಯಾವುದೇ ರೀತಿಯ ಕಿರುಕುಳ, ಬೆದರಿಕೆ, ಅವಮಾನ ಅಥವಾ ಮಾನಸಿಕ ಹಿಂಸೆಯನ್ನು ರ್ಯಾಗಿಂಗ್ ಹೆಸರಿನಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರ್ಯಾಗಿಂಗ್ ಕೇವಲ ತಮಾಷೆಯ ಚಟುವಟಿಕೆಯಲ್ಲ; ಅದು ಗಂಭೀರ ಕಾನೂನುಬಾಹಿರ ಕೃತ್ಯವಾಗಿದ್ದು, ಅದರಲ್ಲಿ ತೊಡಗಿಸಿಕೊಂಡವರಿಗೆ ಕಾನೂನು ಕ್ರಮ ಎದುರಾಗಬಹುದು. ರ್ಯಾಗಿಂಗ್‍ನಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ಸಂಪೂರ್ಣವಾಗಿ ದೂರವಿದ್ದು, ಯಾವುದೇ ಘಟನೆ ಕಂಡುಬಂದಲ್ಲಿ ತಕ್ಷಣ ಕಾಲೇಜು ಆಡಳಿತ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು.
ರ್ಯಾಗಿಂಗ್ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾಲೇಜುಗಳೊಂದಿಗೆ ನಿರಂತರವಾಗಿ ಸಹಕರಿಸಲಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ವಾತಾವರಣವನ್ನು ಕಾಪಾಡಲು ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಪ್ರತಿಭಾ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ ನಾರಾಯಣ ಶೆಟ್ಟಿ ಎನ್‍ಪಿ, ಸುರಕ್ಷಿತ, ಶಿಸ್ತಿನ ಹಾಗೂ ಆರೋಗ್ಯಕರ ಕ್ಯಾಂಪಸ್ ನಿರ್ಮಾಣಕ್ಕೆ ಸಂಸ್ಥೆಯು ಬದ್ಧವಾಗಿದೆ. ವಿದ್ಯಾರ್ಥಿಗಳಲ್ಲಿ ಪರಸ್ಪರ ಗೌರವ, ಜವಾಬ್ದಾರಿ ಮತ್ತು ಸಾಮಾಜಿಕ ಕಾಳಜಿಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಆ್ಯಂಟಿ ರ್ಯಾಗಿಂಗ್ ಸೆಲ್‍ನ ಸಂಯೋಜಕ ಮನು ಡಿ.ಎಲ್. ಹಾಗೂ ಮೇಘಶಾಮ್, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಸುದೀಪ್ ಬುನ್ನನ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ದಿವ್ಯ ಭಂಡಾರಿ, ಉಪನ್ಯಾಸಕರು ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ವರ್ಷ ಸ್ವಾಗತಿಸಿದರು. ನಂದಿತಾ ವಂದಿಸಿದರು. ದ್ವಿತಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *