ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗುವ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಾದಕ ದ್ರವ್ಯಗಳ ಸೇವೆನೆಯಿಂದ ಮನುಷ್ಯನಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ನಷ್ಟವಾಗುವುದಲ್ಲದೇ ಹಲವಾರು ರೀತಿಯ ಗಂಭೀರ ಕಾಯಿಲೆಗಳು ಉಂಟಾಗುವುದರ ಜೊತೆಗೆ ಮನುಷ್ಯನ ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಅಸಮತೋಲನ ಉಂಟಾಗಿ ಆರೋಗ್ಯ ಹದಗೆಡುತ್ತದೆ. ಮಾದಕ ವ್ಯಸನಗಳಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಯುವಜನರಿಗೆ ಅರಿವು ಮೂಡಿಸಬೇಕು. ಶಾಲಾ ಮತ್ತು ಕಾಲೇಜುಗಳಲ್ಲಿ ಮಾದಕ ದ್ರವ್ಯ ಮುಕ್ತ ವಾತಾವರಣವನನ್ನು ಸೃಷ್ಠಿಸಲು ಒತ್ತು ನೀಡಬೇಕು ಎಂದರು.
ಜಿಲ್ಲೆಯ ಪ್ರತೀಯೊಂದು ಔಷಧ ಅಂಗಡಿಗಳಲ್ಲಿ ವೈದ್ಯರು ಶಿಫಾರಸ್ಸು ಮಾಡುವ ಔಷಧಿಗಳನ್ನು ಮಾತ್ರ ರೋಗಿಗಳಿಗೆ ನೀಡಬೇಕು. ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಔಷಧ ಅಂಗಡಿಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ಗಳಲ್ಲಿ ಸಿ.ಸಿ.ಟಿ.ವಿ ಯನ್ನು ಕಡ್ಡಾಯವಾಗಿ ಆಳವಡಿಸಿರುವ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದರು.
ಕೆಲವು ಕೈಗಾರಿಕಾ ಘಟಕಗಳಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ತಯಾರಿಕೆಯನ್ನು ಮಾಡುವ ಸಾಧ್ಯತೆಗಳು ಇರುತ್ತವೆ. ಈ ಬಗ್ಗೆ ಕಾರ್ಮಿಕ ಇಲಾಖೆ, ಕೈಗಾರಿಕಾ ಇಲಾಖೆ ಅಧಿಕಾರಿಗಳು ಆಗಿಂದಾಗ್ಗೆ ತಪಾಸಣೆಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಮಾದಕ ದ್ರವ್ಯಗಳ ಸೇವನೆಗೆ ಒಳಗಾದಲ್ಲಿ ಅದರಿಂದ ಹೊರಬರುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಮಾದಕ ವ್ಯಸನಗಳಿಂದ ದೂರ ಉಳಿಯುವಂತೆ ಮಾಡಲು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಪ್ರಬಂಧ, ಭಾಷಣ, ಚರ್ಚಾಕೂಟ, ಕಿರುನಾಟಕ ಸ್ಪರ್ಧೆಗಳನ್ನು ಪ್ರತೀ ತಿಂಗಳು ಆಯೋಜಿಸಬೇಕು ಎಂದರು.
ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳು ಜಂಟಿಯಾಗಿ ಪ್ರತೀ ಶಾಲಾ- ಕಾಲೇಜುಗಳನ್ನು ಭೇಟಿ ಮಾಡಿ, “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ”ಯ ಮಾನದಂಡಗಳಿಗೆ ಬದ್ದವಾಗಿರುವುದರ ಕುರಿತು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲೆಯಲ್ಲಿ ಒಟ್ಟು 1058 ಶಾಲೆಗಳಲ್ಲಿ 17 ಶಾಲೆಗಳು “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ” ಎಂದು ದೃಢೀಕರಿಸಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲು ಬಾಕಿ ಇದ್ದು, ಇದು ಪೂರ್ಣಪ್ರಮಾಣದಲ್ಲಿ ಆಗಬೇಕೆಂದರು.
ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡ್ರಗ್ಸ್ ಟೆಸ್ಟ್ ಕಿಟ್ಗಳನ್ನು ಕಡ್ಡಾಯವಾಗಿ ದಾಸ್ತಾನು ಇರಿಸಿಕೊಳ್ಳಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟಿಂಗ್ ಕಿಟ್ಗಳ ಮೂಲಕ ಪರೀಕ್ಷೆ ನಡೆಸಬೇಕು ಎಂದ ಅವರು, ಮಾದಕ ವಸ್ತುಗಳ ಬಳಕೆಯ ಪ್ರಕರಣಗಳು ಪತ್ತೆಯಾದಲ್ಲಿ ಸಂಬಂಧಪಟ್ಟ ಹಾಸ್ಟೆಲ್ ವಾರ್ಡನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ತಂಬಾಕು ಮುಕ್ತ ಯುವ ಅಭಿಯಾನ 3.0. ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈಗಾಗಲೇ ಶಾಲಾ-ಕಾಲೇಜು, ಬಸ್ ನಿಲ್ದಾಣಗಳು, ಮಲ್ಪೆ ಬೀಚ್ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಬೀದಿನಾಟಕ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಂಡು, ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್ಗಳ ಗ್ರಾಮಗಳನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಉಳಿದ ಗ್ರಾಮಗಳನ್ನು ಸಹ ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಲ್ಲಿನ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಪಡೆಯಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 104 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ) ಹಾಗೂ 6(ಬಿ) ಅಡಿಯಲ್ಲಿ ಒಟ್ಟು 1249 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 2,18,050 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 173 ಪ್ರಕರಣಗಳಿಂದ 20,250 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ಜಿಲ್ಲೆಯಾದ್ಯಂತ ದಿಢೀರ್ ದಾಳಿಗಳನ್ನು ಹೆಚ್ಚು ನಡೆಸುವುದರೊಂದಿಗೆ ಕೋಟ್ಪಾ ಕಾಯಿದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎ.ಎಸ್.ಪಿ ಸುಧಾಕರ ನಾಯಕ್, ಡಿ.ಹೆಚ್.ಓ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಕುಟಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
