ಉಜಿರೆ: ಕೈಗಾರಿಕಾ ಕ್ಷೇತ್ರದಲ್ಲಿ ಮಹಿಳೆಯರಿಗೂ ವಿಫುಲ ಅವಕಾಶಗಳಿವೆ – ದೇವದಾಸ್ ಶೆಟ್ಟಿ

ಉಜಿರೆ: ಕೈಗಾರಿಕಾ ಕ್ಷೇತ್ರದಲ್ಲಿ ಇಂದು ಮಹಿಳೆಯರಿಗೂ ವಿಫುಲ ಅವಕಾಶಗಳಿವೆ. ಆದರೆ ಆಸಕ್ತ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಮುಂದಿನ ವರ್ಷದಿಂದ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಉದ್ಯಮ ಆರಂಭಿಸುವ ಮಹಿಳೆಯರಿಗೆ ತಮ್ಮ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ 21 ದಿನಗಳ ಉಚಿತ ತರಬೇತಿಯನ್ನು ನೀಡಲಾಗುವುದು ಎಂದು ಸ್ನೇಯ್ಡರ್ ಎಲೆಕ್ಟ್ರಿಕ್ ಫೌಂಡೇಶನ್ ಆಫ್ ಇಂಡಿಯಾ ಕಂಪೆನಿಯ ಉಪಾಧ್ಯಕ್ಷ ದೇವದಾಸ್ ಶೆಟ್ಟಿ ಹೇಳಿದರು.

ಅವರು ಮಂಗಳವಾರ ವೇಣೂರಿನಲ್ಲಿ ಎಸ್.ಡಿ.ಎಂ. ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ಉಪಕರಣಗಳ ಕಾರ್ಯಾಗಾರ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿನಿಯರಿಗೆ ತಮ್ಮ ಸಂಸ್ಥೆಯಿಂದ ವಿಶೇಷ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸುವುದಾಗಿ ಅವರು ಭರವಸೆ ನೀಡಿದರು.
ಐವತ್ತು ವಿದ್ಯಾರ್ಥಿಗಳಿಗೆ ತಮ್ಮ ಕಂಪೆನಿಯ ವತಿಯಿಂದ ಅವರು ಟೂಲ್‌ಕಿಟ್ ವಿತರಿಸಿದರು. ಕಂಪೆನಿಯ ಡಿ.ಜಿ.ಎಂ. ಪ್ರಶಾಂತ ಶೆಟ್ಟಿ ಶುಭಾಶಂಸನೆ ಮಾಡಿದರು.
ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸದಾ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು, ಅಡಗಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು. ಉತ್ತಮ ಕೌಶಲವನ್ನು ಬೆಳೆಸಿಕೊಂಡು ಕಲಿಕೆಯೊಂದಿಗೆ ಗಳಿಕೆಗೂ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಸಂಸ್ಥೆಯ ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಸ್ವಾಗತಿಸಿದರು. ರಾಮಚಂದ್ರ ಶೆಟ್ಟಿ ಧನ್ಯವಾದವಿತ್ತರು. ಪದ್ಮಪ್ರಸಾದ್ ಬಿ. ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *