ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಪೂರ್ವಭಾವಿಯಾಗಿ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ 96% ಸಾಧನೆ ಮಾಡಿರುವ ಕಾರ್ಕಳ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ತಾಲೂಕಿನ 5 ಸಾವಿರ ಜನರು ಉದ್ಯೋಗ ಅಥವಾ ಅನ್ಯ ಕಾರಣ ನಿಮಿತ್ತ ತಾಲೂಕಿನಿಂದ ಹೊರ ಹೋಗಿದ್ದು ಇವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.


ಅವರು ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026ರ ಸಂಬಂಧ ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್ ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಹೆಸರು ಬಿಟ್ಟು ಹೋದವರನ್ನು ಪಟ್ಟಿಯಲ್ಲಿ ಸೇರಿಸುವ ಜವಾಬ್ದಾರಿ ಬಿ. ಎಲ್. ಓ ಗಳ ಮೇಲಿದೆ. ಪರಿಷ್ಕರಣೆ ಸಮಯದಲ್ಲಿ ಎದುರಾಗುವ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು.
18 ವರ್ಷ ಮೀರಿದ ಭಾರತೀಯ ಪ್ರಜೆಯಾಗಿರುವ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ದೇಶದಲ್ಲಿ 2002 ರಲ್ಲಿ ಕೊನೆಯ ಬಾರಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದೆ. ಆ ಬಳಿಕ ಹಳ್ಳಿಗಳು ನಗರಗಳಾಗಿ ಬೆಳೆದು, ಜನಸಂಖ್ಯೆಯೂ ಹೆಚ್ಚಾಗಿದ್ದು ಮತದಾರರನ್ನು ಗುರುತಿಸಲು ಎಸ್ ಐ ಆರ್ ಪ್ರಕ್ರಿಯೆ ನಡೆಸುವುದು ಅತ್ಯವಶ್ಯಕವಾಗಿದೆ. ಕೇವಲ ಭಾರತೀಯ ನಾಗರಿಕರು ಮಾತ್ರ ಸಂವಿಧಾನ ಬದ್ಧ ಮತದಾನ ಮಾಡುವ ಹಕ್ಕನ್ನು ಹೊಂದಬೇಕು ಎನ್ನುವ ಉದ್ದೇಶದಿಂದ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಮುಖ್ಯವಾಗಿ ಬಿ ಎಲ್ ಓ ಮತ್ತು ಬಿ ಎಲ್ ಎ ಗಳ ಮಧ್ಯೆ ಸಮನ್ವಯ ಸಾಧಿಸಲು ತಾಲೂಕು ಮಟ್ಟದಲ್ಲಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನೈಜ ಮತ್ತು ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡು ಪ್ರಕ್ರಿಯೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಬೇಕು. ತಾಲೂಕಿನ ಮತದಾರರ ಪಟ್ಟಿಯ ಮ್ಯಾಪಿಂಗ್ ಅತ್ಯುತ್ತಮವಾಗಿ ನಡೆದಿದ್ದು ಇದಕ್ಕೆ ಸಹಕರಿಸಿದ ಎಲ್ಲರೂ ಅಭಿನಂದನೆಗೆ ಅರ್ಹರು ಎಂದರು.
ಮತಗಟ್ಟೆ ಅಧಿಕಾರಿಗಳು ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಲಿದ್ದು ಆ ವೇಳೆ ನೀಡುವ ನಮೂನೆಯನ್ನು ಮತದಾರರು ಭರ್ತಿ ಮಾಡಿ ಈಗಿನ ಭಾವಚಿತ್ರ ಅಂಟಿಸಿ ಕಡ್ಡಾಯವಾಗಿ ಸಹಿ ಮಾಡಿ ಒಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಗೆ ಹಿಂದಿರುಗಿಸಬೇಕು. ಮತಗಟ್ಟೆ ಅಧಿಕಾರಿಗಳು ಒಟ್ಟು ಮೂರು ಬಾರಿ ಮನೆ ಬಾಗಿಲಿಗೆ ಭೇಟಿ ನೀಡಲಿದ್ದಾರೆ. ಆ ಸಂದರ್ಭದಲ್ಲಿ ನಮೂನೆಯನ್ನು ಭರ್ತಿ ಮಾಡಿ ನೀಡಬಹುದು. ಎಲ್ಲ ಮತದಾರರ ಹೆಸರು ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬಿ.ಎಲ್.ಎ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣ ಪ್ರಕ್ರಿಯೆ ಕುರಿತ ಸಂದೇಹಗಳನ್ನು ಪ್ರಶ್ನಿಸಿ, ಉತ್ತರ ಪಡೆದುಕೊಂಡರು.
ಸಭೆಯಲ್ಲಿ ಕಾರ್ಕಳ ತಹಶೀಲ್ದಾರ್ ಪ್ರದೀಪ್, ನಗರಾಭಿವೃದ್ಧಿ ಕೋಶದ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕಿನ ಬಿ. ಎಲ್ ಓ, ಬಿ.ಎಲ್. ಎ ಗಳು ಉಪಸ್ಥಿತರಿದ್ದರು.
