ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು ರದ್ದುಪಡಿಸಿ, ನವ ಉದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಪಡೆದಿರುವ ಘಟಕಗಳು ನಿಗಧಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದ್ರಿರವರಿಗೆ ಮಂಜೂರಾಗಿರುವ ನಿವೇಶನವನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿ ಸಲ್ಲಿಸಿರುವ ಉದ್ಯಮಿಗಳಿಗೆ ನಿವೇಶನವನ್ನು ಹಂಚಿಕೆ ಮಾಡಲು ಕ್ರಮವಹಿಸಬೇಕು ಎಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳು ಘಟಕ ಸ್ಥಾಪನೆಗೆ ಹಂಚಿಕೆಯಾದ ನಿವೇಶನಗಳಲ್ಲಿ ಉದ್ದಿಮೆ ಪ್ರಾರಂಭಿಸದೇ ಪ್ರತೀ ಸಭೆಯಲ್ಲಿಯೂ ವಿವಿಧ ನೆಪವೊಡ್ಡಿ ಹೆಚ್ಚುವರಿ ಕಾಲಾವಕಾಶ ಕೋರುತ್ತಾರೆ. ಹೆಚ್ಚುವರಿ ಕಾಲಾವಕಾಶ ಪಡೆದ ಹಾಗೂ ಚಟುವಟಿಕೆ ಬದಲಾಯಿಸಿಕೊಂಡ ಘಟಕಗಳ ಸ್ಥಿತಿ-ಗತಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ವರದಿ ನೀಡುವಂತೆ ತಿಳಿಸಿದ ಅವರು, ಇದು ಪುನರಾವರ್ತನೆಯಾದಲ್ಲಿ ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಅರ್ಜಿ ಸಲ್ಲಿಸುವ ಆಸಕ್ತರುಗಳಿಗೆ ನಿವೇಶನವನ್ನು ಮರು ಹಂಚಿಕೆ ಮಾಡಲು ಕ್ರಮವಹಿಸಲಾಗುವುದು ಎಂದರು.
ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕ್ರೆ ಹಾಗೂ ಕೆರೆಬೆಟ್ಟುವಿನಲ್ಲಿ 38.75 ಎಕ್ರೆ ಖಾಸಗಿ ಹಾಗೂ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 113.59 ಎಕ್ರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದು, ಅದರಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಮೋಜಿಣಿ ಶಿವಮೊಗ್ಗ ಇವರು ಜಂಟಿ ಸಮೀಕ್ಷೆ ನಡೆಸಿದ್ದು, ಶೀಘ್ರವಾಗಿ ಗಡಿ ಕಲ್ಲುಗಳನ್ನು ಅಳವಡಿಸುವ ಕಾರ್ಯವನ್ನು ಈಗಾಗಲೇ ಕೈಗೊಂಡಿದ್ದು, ವರದಿಯನ್ನು ಆದ್ಯತೆಯ ಮೇಲೆ ಶೀಘ್ರದಲ್ಲಿಯೇ ನೀಡಬೇಕೆಂದರು.
ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 101.1950 ಎಕ್ರೆ ಖಾಸಗಿ ಜಮೀನನ್ನು ಸಣ್ಣ ಕೈಗಾರಿಕಾ ವಸಾಹತು ಸ್ಥಾಪನೆಗೆ ಗುರುತಿಸಲಾಗಿದ್ದು, ಈ ಕುರಿತ ಪ್ರಸ್ತಾವನೆಗೆ ಸಂಬಂಧಿಸಿದಂತೆ ಬೇಡಿಕೆಯ ವಿವರಗಳನ್ನು ಮಾನ್ಯ ಸಚಿವರಿಗೆ ಸಲ್ಲಿಸಲಾಗಿದೆ. ಸರಕಾರದ ಮಟ್ಟದಲ್ಲಿ ಇದನ್ನು ಅನುಸರಿಸಿ, ಕೈಗಾರಿಕಾ ಪ್ರದೇಶಗಳ ಪ್ರಸ್ತಾನಬೆಗೆ ಅನುಮೋದನೆ ಪಡೆಯಬೇಕು ಎಂದರು.
ಉಡುಪಿ ತಾಲೂಕು ಕೋಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದ ಸ.ನಂ. 06 ರಲ್ಲಿನ 28 ಎಕರೆ ಸರ್ಕಾರಿ ಜಮೀನಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ಮಂಜೂರು ಮಾಡುವಂತೆ ಉಡುಪಿ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದ್ದು, ಈ ಬಗ್ಗೆ ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಗುತ್ತಿಗೆ ಕರಾರು ನಿರ್ವಹಿಸಿಕೊಂಡು ಯೋಜನೆ ಪ್ರಾರಂಭಿಸದೇ ಇರುವ ಘಟಕಗಳ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿಗಳು, ನಂದಿಕೂರು, ಬೆಳಪು ಹಾಗೂ ಮಿಯ್ಯಾರು ಕೈಗಾರಿಕಾ ಪ್ರದೇಶದ 18.39 ಎಕ್ರೆಯಲ್ಲಿ ಒಟ್ಟು 26 ಘಟಕಗಳು ಗುತ್ತಿಗೆ ಕರಾರು ನಿರ್ವಹಿಸಿಕೊಂಡಿದ್ದು, 6 ಘಟಕಗಳು ಅನುಷ್ಠಾನದ ಹಂತದಲ್ಲಿದ್ದು, 1 ಘಟಕವು ನ್ಯಾಯಾಲಯದ ಹಂತದಲ್ಲಿದ್ದು, 19 ಘಟಕಗಳು ಯಾವುದೇ ಕೆಲಸ ಆರಂಭಿಸಿರುವುದಿಲ್ಲ. ಘಟಕ ಪ್ರಾರಂಭಿಸದೇ ಇರುವ ಉದ್ದಿಮೆದಾರರ ಕರಾರು ರದ್ದುಪಡಿಸಿ, ಕೈಗಾರಿಕಾ ಘಟಕ ಸ್ಥಾಪನೆಗೆ ಮುಂದೆ ಬರುವ ಆಸಕ್ತರಿಗೆ ಅವಕಾಶ ಕಲ್ಪಿಸಬೇಕು ಎಂದರು.
ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಸ್ವಾಧೀನ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ಭೂ ಮಾಲೀಕರಿಗೆ ಪರಿಹಾರಧನ ಪಾವತಿಸುವ ಕಾರ್ಯವನ್ನು ಚುರುಕುಗೊಳಿಸಬೇಕು. ಮಿಯ್ಯಾರು ಕೈಗಾರಿಕಾ ಪ್ರದೇಶದಲ್ಲಿನ ಕೈಗಾರಿಕಾ ಘಟಕಗಳಲ್ಲಿ ಹಾಲಿ ಇರುವ ಪರಿವರ್ತಕಗಳು ಓವರ್ಲೋಡ್ ಆಗುವುದರಿಂದ ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಥವಾ ಹಾಲಿ ಇರುವ ಪರಿವರ್ತಕದ ಸಾಮಥ್ರ್ಯವನ್ನು ಹೆಚ್ಚಿಸಲು ಆದ್ಯತೆಯ ಮೇಲೆ ಕ್ರಮವಹಿಸಬೇಕೆಂದರು.
ಕೌಶಲ್ಯಾಭಿವೃದ್ಧಿ ಇಲಾಖೆಯು ಕೈಗಾರಿಕೆಗಳಿಗೆ ಸಂಬಂಧಪಟ್ಟ ಕೌಶಲ್ಯಗಳ ಕೋರ್ಸುಗಳನ್ನು ಹೆಚ್ಚುವರಿಯಾಗಿ ತಮ್ಮ ಕೋರ್ಸುಗಳಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಐ.ಟಿ.ಐ, ಡಿಪ್ಲೋಮಾ ಪಡೆದ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದ ಅವರು, ಉದ್ಯಮಿಗಳು ಬ್ಯಾಂಕುಗಳಲ್ಲಿ ಕೈಗಾರಿಕಾ ಘಟಕಕ್ಕೆ ಸಾಲ ಸೌಲಭ್ಯ ಪಡೆಯುವ ಸಂದರ್ಭದಲ್ಲಿ ಬ್ಯಾಂಕುಗಳ ಸಿಬಿಲ್ ರೇಟಿಂಗ್ಸ್ ಕ್ರಮದಿಂದ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ಲೀಡ್ ಬ್ಯಾಂಕ್ ಅಧಿಕಾರಿಗಳು ಆರ್.ಬಿ.ಐ ಅಧಿಕಾರಿಗಳ ಗಮನಕ್ಕೆ ತರುವುದರೊಂದಿಗೆ ಸಮಸ್ಯೆ ಬಗೆಹರಿಸಲು ಕ್ರಮವಹಿಸುವಂತೆ ಸೂಚಿಸಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಫಲಾನುಭವಿಗಳ 570 ಘಟಕಗಳಿಗೆ 2190.10 ಲಕ್ಷ ರೂ. ಮಾರ್ಜಿನ್ ಹಣ ಬಿಡುಗಡೆಯಾಗಬೇಕಿದ್ದು, ಈವರೆಗೆ 233 ಘಟಕಗಳಿಗೆ 872.08 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. ಬಾಕಿ ಉಳಿದ 337 ಘಟಕಗಳಿಗೆ 1318.02 ಲಕ್ಷ ರೂ. ಮಾರ್ಜಿನ ಹಣ ಶೀಘ್ರದಲ್ಲಿ ನೀಡಲು ಕ್ರಮವಹಿಸುವಂತೆ ಸೂಚನೆ ನೀಡಿದರು.
ಪಿ.ಎಂ ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ಪಡೆಯಲು 5875 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, 1383 ಅರ್ಜಿಗಳು ತಿರಸ್ಕøತಗೊಂಡು, 4064 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲಸೌಲಭ್ಯ ಮಂಜೂರಾಗಿದ್ದು, 3782 ಫಲಾನುಭವಿಗಳಿಗೆ 37.07 ಕೋಟಿ ರೂ. ಆರ್ಥಿಕ ಸಹಾಯಧನ ವಿತರಿಸಲಾಗಿದೆ ಎಂದ ಅವರು, ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಆಸಕ್ತರಿಗೆ ಟೂಲ್ ಕಿಟ್ ವಿತರಿಸುವಂತೆ ತಿಳಿಸಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
