ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಭೂಮಿ ದಿನಾಚರಣೆ’ ಸಲುವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತ ಸ್ವರ ವೇದಿಕೆಯಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಕೋಮಲ ಆರ್. ಸಿ ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ಕಾರ್ಕಳ ಇವರು, ಪ್ರಸ್ತುತ ದಿನಮಾನಗಳಲ್ಲಿ ಪರಿಸರವು ಮಾಲಿನ್ಯಗೊಳ್ಳುತ್ತಿದ್ದು ಶುದ್ಧವಾದ ಗಾಳಿ, ನೀರು ಸಿಗದೇ ಸಮಾಜ ಶೋಚನೀಯ ಸ್ಥಿತಿಯಲ್ಲಿದೆ ಎಂದು ಕಳವಳವನ್ನು ವ್ಯಕ್ತಪಡಿಸಿ ಪರಿಸರ ಸಂರಕ್ಷಣೆಯಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಕಾರ್ಕಳದ ನ್ಯಾಯವಾದಿ ಸಂಘಗಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪದ್ಮಪ್ರಸಾದ್ ಜೈನ್, ನಾವೆಲ್ಲರೂ ಕಾನೂನಿನ ಚೌಕಟ್ಟಿನಲ್ಲಿ ಸಮಾಜದಲ್ಲಿ ಜೀವನವನ್ನು ನಡೆಸಬೇಕು ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಜನ ಸಮುದಾಯ ಕಾರ್ಯಪ್ರವೃತ್ತರಾಗಬೇಕು ಎಂದು ನುಡಿದರು.


ಸಂಪನ್ಮೂಲ ವ್ಯಕ್ತಿಗಳಾದ ಸುದೇಶ್ ಶೆಟ್ಟಿ ನ್ಯಾಯವಾದಿಗಳು ಕಾರ್ಕಳ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಾಗುತ್ತಿದ್ದು ಇದಕ್ಕೆಲ್ಲ ಮೂಲ ಕಾರಣ ಪರಿಸರ ನಾಶ. ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ಪರಿಶುದ್ಧ ನೀರು, ನೀಲಿ ಆಕಾಶವನ್ನು ಬಿಟ್ಟು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟಂತೆ ಅನೇಕ ಕಾಯ್ದೆ ಕಾನೂನುಗಳಿವೆ ಅದನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೆ ಆದಲ್ಲಿ ಖಂಡಿತವಾಗಿಯೂ ಸುಂದರ ಪರಿಸರವನ್ನು ಕಾಣಬಹುದು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿರುವ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಯವರು, ನಾವೆಲ್ಲರೂ ಪರಿಸರ ಕಾಳಜಿ ಬಗ್ಗೆ ತಿಳಿದುಕೊಂಡಿದ್ದರೂ ಅದನ್ನು ಅನುಷ್ಠಾನಗೊಳಿಸುವಲ್ಲಿ ಎಡವಿದ್ದೇವೆ. ಈಗಾಗಲೇ ಕ್ರಿಯೇಟಿವ್ ಸಂಸ್ಥೆ ಎನ್ ಎಸ್ ಎಸ್ ಹಾಗೂ ಇತರ ಕಾರ್ಯಕ್ರಮಗಳ ಮೂಲಕ ಅನೇಕ ಪರಿಸರ ಸಂಬಂಧಿ ಕಾರ್ಯಕ್ರಮಗಳನ್ನು ಮತ್ತು ಗಿಡ ನೆಡುವಂತಹ ಯೋಜನೆಗಳನ್ನು ರೂಪಿಸಿದ್ದು ಪರಿಸರ ಸಂರಕ್ಷಣೆಯಲ್ಲಿ ಕ್ರಿಯೇಟಿವ್ ಸಂಸ್ಥೆ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾನೂನು ಸೇವೆಗಳ ಸಮಿತಿಯ ಸದಸ್ಯರಾದ ಜ್ಯೋತಿ ಹಾಗೂ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಭಾಷಾ ಉಪನ್ಯಾಸಕರಾದ ಸಂತೋಷ್ ನಡೆಸಿಕೊಟ್ಟರು.
