ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ ಪ್ರಾರ್ಥನೆ ನೆರವೇರಿಸಿದರು. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರ ವರೆಗೆ ನಡೆಯಲಿರುವ ಭಜನಾ ಕಮ್ಮಟದ ವಿವಿಧ ಕಾರ್ಯಕ್ರಮಗಳ ಕುರಿತು ಭಜನಾ ಪರಿಷತ್ ರಾಜ್ಯ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್ ಅವರು ಮಾಹಿತಿ ನೀಡಿದರು. ರಾಜ್ಯದಾದ್ಯಂತ ಭಜನಾ ಪರಿಷತ್‌ನ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಅಭಿನಂದಿಸಿದ ಅವರು, ಕಮ್ಮಟದ ಸಂಪೂರ್ಣ ರೂಪುರೇಷೆ ಹಾಗೂ ಕಾರ್ಯಕ್ರಮಗಳ ವಿವರವನ್ನು ತಿಳಿಸಿದರು.

ಪೂಜ್ಯ ಖಾವಂದರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಅವರು ಮಾತನಾಡಿ, ರಾಜ್ಯದಾದ್ಯಂತ ಭಜನಾ ಪರಿಷತ್ ನಡೆಸುತ್ತಿರುವ ಉತ್ತಮ ಕಾರ್ಯಚಟುವಟಿಕೆಗಳು ಹಾಗೂ ಪದಾಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕ್ಷೇತ್ರದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ರಾಜ್ಯದ ವಿವಿಧ ತಾಲೂಕುಗಳ ಪದಾಧಿಕಾರಿಗಳು ತಮ್ಮ-ತಮ್ಮ ತಾಲೂಕಿನ ಸಾಧನಾ ವರದಿಗಳನ್ನು ಮಂಡಿಸಿದರು. ಭಜನಾ ಪರಿಷತ್‌ನ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಭಜನಾ ಕಮ್ಮಟದ ಯಶಸ್ವಿ ಆಯೋಜನೆ ಕುರಿತು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಪಾಲ್ಗೊಂಡ ಎಲ್ಲ ಪದಾಧಿಕಾರಿಗಳನ್ನು ತಾಳ ಹಾಗೂ ಶಾಲು ನೀಡಿ ಗೌರವಿಸಲಾಯಿತು. ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಬಸ್ರೂರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್. ಬಸ್ರೂರು ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *