ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2025-2026 ನೇ ಸಾಲಿನ ದ್ವಿತೀಯ ರಕ್ತದಾನ ಶಿಬಿರ

ನಿಟ್ಟೆ: ‘ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯವಿದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮವಾದ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು ಎಂದರೆ ತಪ್ಪಾಗದು. ರಕ್ತದಾನ ಮಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣರಾಗುತ್ತೇವೆ’ ಎಂದು ದಕ್ಷಿಣಕನ್ನಡ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಕಿಶೋರಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ ವಿಭಾಗದ ಏಐಎಂಎಸ್ ಘಟಕ, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಗಾಜ್ರಿಯಾ ಆಸ್ಪತ್ರೆ, ಲೇಡಿಗೋಶನ್ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಫೆ. 4 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಟ್ಟೆ ತಾಂತ್ರಿಕ ಕಾಲೇಜಿನ ಈ ಯೋಜನೆಯು ಹಲವರಿಗೆ ಉಪಯುಕ್ತವಾಗಲಿ. ಇಂತಹ ಶಿಬಿರಗಳು ಸಮಾಜದ ಆರೋಗ್ಯದತ್ತ ಗಮನ ಹರಿಸುವುದರ ಜೊತೆಗೆ ಯುವಕರಲ್ಲಿ ಸೇವಾ ಮನೋಭಾವ ಬೆಳೆಸಲು ಉಪಯುಕ್ತ’ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ‘ರಕ್ತದಾನ ಶಿಬಿರವು ಒಂದು ಉತ್ತಮ ಯೋಜನೆಯಾಗಿದ್ದು ಇದಕ್ಕೆ ವಿದ್ಯಾರ್ಥಿಗಳು ಬಹಳಷ್ಟು ಹುಮ್ಮಸ್ಸಿನಿಂದ ಭಾಗವಹಿಸುತ್ತಾರೆ. ಕಾಲೇಜಿನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹಾಗೂ ರಕ್ತದಾನಕ್ಕೆ ನೋಂದಾಯಿಸುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ರಕ್ತದಾನ ಶಿಬಿರವನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತಿದೆ’ ಎಂದರು.

ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ. ನಾಗೇಶ್ ಪ್ರಭು, ನಿಟ್ಟೆ ರೆಡ್‌ಕ್ರಾಸ್‌ನ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್.ಸಿ.ಸಿ ಆಫೀಸರ್ ಡಾ.ಶಿವಪ್ರಸಾದ್ ಶೆಟ್ಟಿ, ಎನ್.ಎಸ್.ಎಸ್ ಅಧಿಕಾರಿ ಡಾ. ಧನಂಜಯ್, ಕೆ.ಎಸ್ ಹೆಗ್ಡೆ ಆಸ್ಪತ್ರೆ, ಗಾಜ್ರಿಯಾ ಆಸ್ಪತ್ರೆ, ಲೇಡಿಗೋಶನ್ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಭವ್ಯ ಎಸ್ ಅಮಿನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಾಂಜಲಿ ಎನ್ ವಂದಿಸಿದರು. ವಿದ್ಯಾರ್ಥಿನಿ ಸ್ನೇಹ ಕಾರ್ಯಕ್ರಮ ನಿರೂಪಿಸಿದರು.

ಈ ಒಂದು ದಿನದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕ ಹಾಗೂ ಭೋದಕೇತರ ವರ್ಗದವರ ರಕ್ತದಾನದೊಂದಿಗೆ ೫೫೧ ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಕಾಲೇಜಿನ ಪತ್ರಿಕಾಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *