ಎ.10, 2020, ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧದ ಆದೇಶವಿದ್ದರೂ ಪಡುಕೋಣೆ ಸಂತ ಅಂತೋನಿ ಚರ್ಚ್ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರಿಂದ ಆರು ಜನರ ಮೇಲೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಪಡುಕೋಣೆ ಸಂತ ಅಂತೋನಿ ಚರ್ಚ್ನಲ್ಲಿ ಗುರುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರವಾಣಿ ಕರೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ಸಮಯ ಸಂತ ಅಂತೋನಿ ಚರ್ಚ್ ನಲ್ಲಿ ಫಾದರ್ ಫ್ರೆಡ್ ಮಸ್ಕರಿಯನ್ ಹಾಗೂ ಇತರ 6 ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು ಸಿ.ಆರ್.ಪಿ.ಸಿ ಕಲಂ144(3) ಉಲ್ಲಂಘನೆ ಮಾಡಿರುವುದು ದೃಢಪಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ ಕೋವಿಡ್-19ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ, ಚರ್ಚ್ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರಿಂದ ಬೈಂದೂರು ತಹಶಿಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಸಪ್ಪ ಪಿ. ಪೂಜಾರಿ ಅವರು ನೀಡಿದ ದೂರಿನಂತೆ ಸಂತ ಅಂತೋನಿ ಚರ್ಚ್ ಧರ್ಮಗುರು ಫ್ರೆಡ್ ಮಸ್ಕರೇನಸ್ ಹಾಗೂ ಇತರ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.