ಪುತ್ತೂರು: ಅವಕಾಶಗಳು ದೊರೆತಾಗ ಅವುಗಳನ್ನು ಬಳಸುವ ಕಲೆಯನ್ನು ರೂಢಿಸಿಕೊಳ್ಳಬೇಕು. ಈಗೀನ ವರ್ಷಗಳಲ್ಲಿ ಶಿಕ್ಷಣಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಅಪಾರ ವೇದಿಕೆಗಳು ಲಭ್ಯವಾಗುತ್ತಿವೆ. ಸೋಲು ಗೆಲುವನ್ನು ಲಕ್ಷಿಸದೆ ಭಾಗವಹಿಸುವುದೊಂದನ್ನೇ ಗುರಿಯನ್ನಾಗಿಸಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಆಗ ನಮ್ಮ ವ್ಯಕ್ತಿತ್ವದ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಕಾಲೇಜು ವಾರ್ಷಿಕೋತ್ಸವದ ನೆಲೆಯಲ್ಲಿ ಆಯೋಜಿಸಲಾದ ವಿವಿಧ ಸಾಹಿತ್ತಿಕ - ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು.

ಸಾವಿರಾರು ವಿದ್ಯಾರ್ಥಿಗಳಿರುವ ವಿದ್ಯಾಸಂಸ್ಥೆಯಲ್ಲಿ ಅನೇಕರಿಗೆ ಅವಕಾಶಗಳು ಕೈತಪ್ಪಿಹೋಗುತ್ತವೆ. ಆದರೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದಾಗ ಪ್ರತಿಯೊಬ್ಬರಿಗೂ ಅವಕಾಶ ಲಭ್ಯವಾಗುತ್ತದೆ. ಹಾಗೆ ದೊರಕುವ ವೇದಿಕೆಗಳನ್ನು ಸಮರ್ಥವಾಗಿ ಬಳಸಲು ಸದಾ ಸಿದ್ಧರಿರಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಪ್ರತಿಯೊಬ್ಬ ಅಧ್ಯಾಪಕರಿಗೂ ಪರಿಚಿತನಾಗಿರುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಅದು ನಮ್ಮ ವ್ಯಕ್ತಿತ್ವವನ್ನು ಅರಳಿಸುತ್ತದೆ ಎಂದು ನುಡಿದರು.

ಪ್ರಸ್ತಾವನೆಗೈದು ಸ್ವಾಗತಿಸಿದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ಸದ್ಯದಲ್ಲೇ ನಡೆಯಲಿರುವ ಕಾಲೇಜು ವಾರ್ಷಿಕೋತ್ಸವದ ನೆಲೆಯಲ್ಲಿ ಸುಮಾರು 19 ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಭಾಗವಹಿಸುವಿಕೆ ಸ್ಪರ್ಧೆಗಳನ್ನು ಸುಂದರಗೊಳಿಸಿದೆ. ಫಲಾನುಭವಿಗಳ ಹುಮ್ಮಸ್ಸು ಹೆಚ್ಚಿದ್ದರೆ ಆಯೋಜಕರಿಗೂ ಉತ್ಸಾಹ ಮೂಡುಉದಕ್ಕೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ವಂದಿಸಿದರು. ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್‍ತೇಜಶಂಕರ ಸೋಮಯಾಜಿ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ತರುವಾಯ ವಿವಿಧ ಸ್ಪರ್ಧೆಗಳು ಆಯೋಜನೆಗೊಂಡವು.