ಕೊಣಾಜೆ, ಮಂಗಳೂರು: ಸಾಹಿತ್ಯ ಸಮ್ಮೇಳನಗಳು ಸಾಹಿತ್ಯ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಊರಿನ ಜನರಲ್ಲಿ ಕನ್ನಡಾಭಿಮಾನವನ್ನು ಹೆಚ್ಚಿಸಬೇಕು ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ವಿವಿಯ ಹಳೆಸೆನೆಟ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು, ಸಾಹಿತಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರ ಒಗ್ಗೂಡಿಕೆ , ಪಾಲ್ಗೊಳ್ಳುವಿಕೆಯೆ ಮೂಲಕ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಸಮಿತಿಯ ಸಂಘಟಕರು, ಪದಾಧಿಕಾರಿಗಳ ಪಾತ್ರವು ಅತ್ಯಂತ ಮಹತ್ತರವಾದುದು. ಉಳ್ಳಾಲದಲ್ಲಿ ನಡೆಯುತ್ತಿರುವ ಜಿಲ್ಲಾ ಸಮ್ಮೇಳನವನ್ನು ರಾಜ್ಯಕ್ಕೆ ಮಾದರಿಯಾಗುವಂತೆ ಸಂಘಟಿಸಬೇಕು ಎಂದರು.
ಮಂಗಳೂರು ವಿವಿ ಕುಲಸಚಿವರಾದ ರಾಜು ಮೊಗವೀರ ಕೆ, ಮೂಡಾ ಮಾಜಿ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ, ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷರಾದ ಶ್ರೀನಾಥ್ ಹೆಗ್ಡೆ, ಶಿಶು ಇಲಾಖೆಯ ಅಧಿಕಾರಿ ಶೈಲಜಾ ಕಾರಂಗಿ ಶಿಕ್ಷಣ ಇಲಾಖೆಯ ಈಶ್ವರ್ , ಕೋಟೆಕಾರ್ ಪಟ್ಟಣ ಪಂಚಾಯತಿಯ ಮಾಲಿನಿ, ಕೊಣಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ ದಾಮೋದರ್ ಕುಂದರ್, ಉಳ್ಳಾಲ ನಗರ ಸಭೆಯ ಆಯುಕ್ತರಾದ ಮತ್ತಡಿ ಮೊದಲಾದವರು ಉಪಸ್ಥಿತರಿದ್ದರು.
ಸಮ್ಮೇಳನ ಸ್ವಾಗತ ಸಮಿತಿಯ ಪ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಕುಂಬ್ಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್ ಅವರು ಸ್ವಾಗತಿಸಿದರು. ತ್ಯಾಗಂ ಹರೇಕಳ ನಿರೂಪಿಸಿದರು. ಲಯನ್ ಚಂದ್ರಹಾಸ ಶೆಟ್ಟಿ ವಂದಿಸಿದರು.
ಸಮ್ಮೇಳನದಲ್ಲಿ ವಿವಿಧ ಲೇಖಕರ ಒಟ್ಟು 18 ಪುಸ್ತಕಗಳು ಬಿಡುಗಡೆಗೊಳ್ಳಲಿವೆ.
ಮಂಗಳ ಸಭಾಂಗಣದ ಆವರಣದಲ್ಲಿ ವಿವಿಧ ಪುಸ್ತಕ, ಆಹಾರ ಮಳಿಗೆಗಳು ಸೇರಿದಂತೆ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಸಾರುವ ವಸ್ತುಪ್ರದರ್ಶನ ನಡೆಯಲಿದೆ.
ಗ್ರಾಮಗಳಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.