ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡೆಯಲ್ಲಿ ಉರುಳಿಗೆ ಸಿಕ್ಕ ಚಿರತೆ ಒದ್ದಾಡಿ ಸಾವನ್ನಪ್ಪಿದೆ. ಉಳೆಪಾಡಿ ಮಿತ್ತಬೆಟ್ಟು ಬಳಿಯ ಕಾಡಿನಲ್ಲಿ  ಸ್ಥಳೀಯರು ಕಾಡು ಪ್ರಾಣಿಗಳ ಹಾವಳಿ ತಡೆಯಲಾರದೆ ಇಟ್ಟಿದ್ದ ಉರುಳಿಗೆ ಚಿರತೆಯು ರಾತ್ರಿ ಹೊತ್ತು ಬಿದ್ದಿರುವ ಘಟನೆ ನಡೆದಿದೆ ಎನ್ನಲಾಗಿದೆ.

ಮಂಗಳವಾರ ಮುಂಜಾನೆಯು  ಹೊತ್ತಿಗೆ ಸ್ಥಳೀಯ ಮನೆಯವರು ಕಾಡಿನ ಕಡೆಗೆ ನಾಯಿ ಬೊಗಳುವ ಶಬ್ದ ಕೇಳಿ ಭಯಭೀತರಾಗಿ ಸ್ಥಳಕ್ಕೆ ಧಾವಿಸಿದಾಗ ಉರುಳಿಗೆ ಚಿರತೆ ಬಿದ್ದು ಒದ್ದಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ ಐಕಳ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಶೆಟ್ಟಿ ಮತ್ತು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಬರುವ ಮೊದಲು, ಚಿರತೆ ಉರುಳಿಗೆ ಸಿಕ್ಕಿ ಒದ್ದಾಡಿ ಪ್ರಾಣ ಬಿಟ್ಟಿದೆ ಎನ್ನಲಾಗಿದೆ.

ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳೆಪಾಡಿ ಪರಿಸರದಲ್ಲಿ ಕಳೆದ ಕೆಲವು ತಿಂಗಳಿನಿಂದ ಚಿರತೆ ಹಾಗೂ ಇತರ ಕಾಡು ಪ್ರಾಣಿಗಳ ಕಾಟ ವಿಪರೀತವಾಗಿದ್ದು ಸ್ಥಳೀಯರು ಭಯಭೀತರಾಗಿದ್ದರು. ಕಳೆದ ಕೆಲವು ತಿಂಗಳಿನಿಂದ ಸ್ಥಳೀಯರ ಅನೇಕ ಸಾಕು ನಾಯಿಗಳು ಚಿರತೆಗೆ ಆಹಾರವಾಗಿತ್ತು.

ಸ್ಥಳಕ್ಕೆ ಐಕಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಾಕರ ಚೌಟ, ಮೂಡಬಿದ್ರೆ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಎಸಿಎಫ್ ಸತೀಶ್, ಕಿನ್ನಿಗೋಳಿ ಬೀಟ್ ಫಾರೆಸ್ಟರ್ ರಾಜು ಎಲ್.ಜೆ, ಡಿಆ‌ಎಫ್ ನಾಗೇಶ್ ಬಿಲ್ಲವ, ಬೀಟ್ ಫಾರೆಸ್ಟರ್ ಸಂತೋಷ್ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದು ಚಿರತೆಯ ಶವವನ್ನು ಮಹಜರು   ನಡೆಸಿ ಮರಣೋತ್ತರ  ಪರೀಕ್ಷೆಗೆ ಸುರತ್ಕಳಿಗೆ ಕಳುಹಿಸಲಾಗಿದ್ದೆ ಎಂದು ತಿಳಿಸಿದ್ದಾರೆ.