ಉಡುಪಿ, ಜೂ 25: ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಪದ್ಧತಿಯನ್ನು ನಿರ್ಬಂಧಿಸಲಾಗಿದ್ದು, ಇಂತಹ ಉಲ್ಲಂಘನೆ ಪ್ರಕರಣಗಳೂ ಕಂಡುಬಂದಲ್ಲಿ ಸ್ಥಳೀಯ ಸಂಸ್ಥೆಯ ಪರಿಶೀಲನಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ದೂರು ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 

ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಬಂದ ತಕ್ಷಣವೇ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶೀಲನಾ ಅಧಿಕಾರಿಗಳು ತುರ್ತಾಗಿ ಸ್ಥಳ ಪರಿಶೀಲನೆ ನಡೆಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆಯೋಗಕ್ಕೆ ವರದಿ ಸಲ್ಲಿಸಬೇಕೆಂದು ತಿಳಿಸಿದರು.

ಮನೆ, ಕಂಪನಿಗಳೂ, ಆಸ್ಪತ್ರೆ, ಅಪಾರ್ಟ್‍ಮೆಂಟ್ ಸೇರಿದಂತೆ ಇತರೆ ಯಾವುದೇ ಕಟ್ಟಡಗಳಲ್ಲಿ ಮ್ಯಾನ್ ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿಗಳು ಕಟ್ಟಿಕೊಂಡಲ್ಲಿ ಸ್ವಚ್ಛಗೊಳಿಸಲು ಅನುಕೂಲವಾಗುವಂತೆ ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಹಾಯವಾಣಿ ಸಂಖ್ಯೆ 14420 ಹಾಗೂ ಗ್ರಾಮೀಣ ಪ್ರದೇಶದಲ್ಲಿ 9480985555 ಗೆ ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಸಂಖ್ಯೆ ಪ್ರದರ್ಶಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಪ್ರತಿಯೊಬ್ಬ ಮ್ಯಾನ್ಯುಯಲ್ ಸ್ಕಾವೆಂಜರ್ಸ್‍ಗಳಿಗೆ ಹಾಗೂ ಮೃತಪಟ್ಟ ಮ್ಯಾನ್ಯುಯಲ್ ಸ್ಕಾವೆಂಜರ್ಸ್‍ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿಯನ್ನು ವಿತರಿಸಬೇಕು. ಅಲ್ಲದೇ ಒಂದು ಬಾರಿ ನಗದು ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿವೇತನ, ಉದ್ಯೋಗ, ಸಾಲಸೌಲಭ್ಯ ಇತ್ಯಾದಿ ರೀತಿಯ ಪುನರ್ವಸತಿ ಕಲ್ಪಿಸಬೇಕು ಎಂದ ಅವರು, ವಸತಿ ಶಾಲೆಗಳಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆ ಶೇ. 5 ರಷ್ಟು ನೇರ ಪ್ರವೇಶ ಕಲ್ಪಿಸಲಾಗುವುದು. ಇದರ ಬಗ್ಗೆ ಅವರಿಗೆ ಮಾಹಿತಿ ನೀಡಬೇಕು ಎಂದರು.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಡ್ರೈವರ್ಸ್, ಲೋಡರ್ಸ್ ಗಳಿಗೆ ಪ್ರತೀ ಮಾಹೆ ವೇತನವನ್ನು ಕಾಲಕಾಲಕ್ಕೆ ಪಾವತಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ 155 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಲಾಗಿದೆ. ಅವರಲ್ಲಿ 3 ಜನ ಪೌರ ಕಾರ್ಮಿಕರು ಈವರೆಗೆ ನೇಮಕಾತಿ ಆಗಿರುವುದಿಲ್ಲ. ಇದರ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಪೌರ ಕಾರ್ಮಿಕರು ಪ್ರತಿ ದಿನ ತಮ್ಮ ಕಾರ್ಯನಿರ್ವಹಿಸುವಾಗ ಸುರಕ್ಷತಾ ಪರಿಕರಗಳನ್ನು ಧರಿಸಿ, ಕಾರ್ಯನಿರ್ವಹಿಸಬೇಕು. ಆದರೆ ಅವುಗಳ ಬಳಕೆ ಮಾಡದೇ ಇರುವುದು ಕಂಡುಬರುತ್ತಿದೆ. ಕಡ್ಡಾಯ ಬಳಕೆ ಮಾಡುವಂತೆ ಎಚ್ಚರ ವಹಿಸಬೇಕು ಎಂದ ಅವರು, ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ತಪ್ಪದೇ ಮಾಡಬೇಕೆಂದು ತಿಳಿಸಿದರು.

ಸರ್ಕಾರ ಮೀಸಲಿಟ್ಟಿರುವ ಶೇ. 24.10 ಅನುದಾನದಲ್ಲಿ ಶೇ. 20 ರಷ್ಟು ಅನುದಾನವನ್ನು ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟು, ಸರ್ಕಾರದ ಆದೇಶದನ್ವಯ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಪೌರ ಕಾರ್ಮಿಕರಿಗೆ ಆದ್ಯತೆಯ ಮೇಲೆ ಒಂದು ತಿಂಗಳ ಒಳಗಾಗಿ ನಿವೇಶನ, ನಿವೇಶನ ಹೊಂದಿದವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ಪೌರಾಯುಕ್ತ ರಾಯಪ್ಪ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.