ಉಡುಪಿ: ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬ್ರಹ್ಮಶ್ರೀ ನಾರಾಯಣ ಗುರುರವರ ಜಯಂತಿ ಕಾರ್ಯಕ್ರಮವನ್ನು ಸೆಪ್ಟಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ತಾಲೂಕು ಮಣಿಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಚರಿಸಲಾಗುತ್ತಿದ್ದು, ಖ್ಯಾತ ಉಪನ್ಯಾಸಕರಿಂದ ನಾರಾಯಣ ಗುರುಗಳ ಕುರಿತು ಉತ್ತಮ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಬೇಕು ಎಂದರು. 

ಸಭಾ ಕಾರ್ಯಕ್ರಮಕ್ಕೂ ಮುನ್ನ ನಾರಾಯಣ ಗುರುಗಳ ಕುರಿತು ಭಜನೆ ಕಾರ್ಯಕ್ರಮವನ್ನು ಏರ್ಪಡಿಸಲು ಕ್ರಮವಹಿಸಬೇಕು. ಬ್ರಹ್ಮಶ್ರೀ ನಾರಾಯಣ ಗುರು ಅವರ ತತ್ವ, ಆದರ್ಶ, ಜೀವನ ಚರಿತ್ರೆ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದ ಅವರು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ಸೆಪ್ಟಂಬರ್ 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರಗಳ ಮೇಲುಸ್ತುವಾರಿಯಲ್ಲಿ ಕಡ್ಡಾಯವಾಗಿ ಆಯೋಜಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ವಿವಿಧ ಸಂಘಟನೆಗಳ ಮುಖಂಡರುಗಳಿಗೆ ನೀಡಿ ಆಹ್ವಾನಿಸಬೇಕು ಎಂದರು.

ಉಡುಪಿ ಶಾಸಕ ಯಶ್‍ಪಾಲ್ ಎ ಸುವರ್ಣ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರ ಆದರ್ಶಗಳು ಜನಸಾಮಾನ್ಯರಿಗೆ ಮನಮುಟ್ಟುವಂತೆ ತಿಳಿಸುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಸೂಕ್ತ ಕ್ರಮವಹಿಸಬೇಕು ಎಂದರು.

ಕಾರ್ಯಕ್ರಮದ ರೂಪುರೇಷೆ ಹಾಗೂ ಇತರೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. 

ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ದಿನದಂದು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನಾರಾಯಣ ಗುರುಗಳ ಸಂದೇಶವನ್ನು ನೀಡುವಂತೆ ಹಾಗೂ ನಾರಾಯಣ ಗುರುಗಳ ಜೀವನ ಚರಿತ್ರೆ ಪುಸ್ತಕವನ್ನು ಶಾಲಾ ಗ್ರಂಥಾಲಯಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಸಮಾಜದ ಬಾಂಧವರು ಮನವಿ ಮಾಡಿದರು.   

ಸಭೆಯಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.