ಉಡುಪಿ, ಅ21: ಮಂಗಳೂರು ವಿಶ್ವವಿದ್ಯಾನಿಲಯ ರೆಡ್‍ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‍ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‍ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‍ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ನಗರದ ಅಜ್ಜರಕಾಡುವಿನ ರೆಡ್‍ಕ್ರಾಸ್ ಭವನದಲ್ಲಿ ನಡೆಯಿತು.

ರೆಡ್‍ಕ್ರಾಸ್ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಡಿಸಿಕೊಳ್ಳುವಂತೆ ತಿಳಿಸಿದರು. 

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‍ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಮಾತನಾಡಿ, ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತರಬೇತಿ ಕಾರ್ಯಾಗಾರವು ಬಹು ಮುಖ್ಯವಾದುದು ಎಂದರು. 

ಜಿಲ್ಲಾ ರೆಡ್‍ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಜುನಾಥ ಪೈ ಮೆಮೊರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‍ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ರೆಡ್‍ಕ್ರಾಸ್ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 

ರೆಡ್‍ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿ, ರೆಡ್‍ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.