ಉಡುಪಿ, ಮಾ 11: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬೇಸಿಗೆ ಕಾಲದಲ್ಲಿ ಜಾತ್ರೆ, ರಥೋತ್ಸವ, ಊರು ಹಬ್ಬ ಸೇರಿದಂತೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳು ಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಸ್ಪೋಟಗೊಳ್ಳುವುದು ಅಥವಾ ಹರಡುವ ಸಾಧ್ಯತೆಗಳು ಇರುತ್ತವೆ. ಇವುಗಳ ಬಗ್ಗೆ ಮುಂಜಾಗ್ರತಾ ವಹಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಹಾಗೂ ಸ್ವಚ್ಛತೆಗೆ ಆದ್ಯತೆಯನ್ನು ನೀಡಬೇಕು ಎಂದರು.
ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಅಡಿ ಅನುಮತಿ ಪಡೆದ ಕ್ಲಿನಿಕ್ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿಯನ್ನು ಪ್ರದರ್ಶನ ಮಾಡುವುದು ಕಡ್ಡಾಯವಾಗಿದ್ದು, ಒಂದು ವೇಳೆ ಪ್ರದರ್ಶನ ಮಾಡದಿದ್ದಲ್ಲಿ ಮೊದಲ ಬಾರಿ ನೋಟೀಸ್ ನೀಡಿ, ಮತ್ತೊಮ್ಮೆ ಪುನರಾವರ್ತಿಸಿದ್ದಲ್ಲಿ ಅಂತಹ ಆರೋಗ್ಯ ಸಂಸ್ಥೆ ಅಥವಾ ಕ್ಲಿನಿಕ್ಗಳ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದ ಅವರು, ಕ್ಲಿನಿಕ್ಗಳು ಹಾಗೂ ನರ್ಸಿಂಗ್ ಹೋಂ ಗಳಲ್ಲಿ ನಿರ್ವಹಣೆ ಕೆ.ಪಿ.ಎಂ.ಇ ಕಾಯ್ದೆಯ ನಿಯಮಾನುಸಾರ ಆಗುತ್ತಿದೆಯೇ ಎಂಬ ಬಗ್ಗೆ ಆಗಾಗ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಈವರೆಗೆ 73 ಶಿಶು ಮರಣಗಳು ಉಂಟಾಗಿವೆ. ಜಿಲ್ಲೆಯಲ್ಲಿ ವೈದ್ಯಕೀಯ ಸೇವಾ ಸೌಲಭ್ಯ ಉತ್ತಮವಾಗಿದೆ. ಆದರೂ ಸಹ ಶಿಶು ಮರಣಗಳಾಗುತ್ತಿವೆ. ಇದಕ್ಕೆ ಕಾರಣಗಳನ್ನು ಅರಿಯಲು ಸಮಿತಿ ರಚಿಸಿ, ಉನ್ನತ ಮಟ್ಟದ ವರದಿಯನ್ನು ಪಡೆದು ಶಿಶು ಮರಣದ ಸಂಖ್ಯೆಯನ್ನು ಕಡಿಮೆಗೊಳಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಮಕ್ಕಳಿಗೆ ರೋಗ ನಿರೋಧಕ ಚುಚ್ಚು ಮದ್ದುಗಳನ್ನು ನೀಡುವ ಕಾರ್ಯಗಳು ಉತ್ತಮ ರೀತಿಯಲ್ಲಿ ಆಗಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದ ಅವರು, ಹೆಪಟೈಟಿಸ್ ಬಿ ಚುಚ್ಚುಮದ್ದುಗಳನ್ನು ಮಗು ಜನಿಸಿದ 24 ಗಂಟೆಯ ಒಳಗಾಗಿ ನೀಡಬೇಕು. ಆದರೆ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ನೀಡದೇ ಇರುವ ಬಗ್ಗೆ ಕೇಳಿ ಬರುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಕ್ಷಯರೋಗ ತಪಾಸಣೆ ಕುರಿತು 47,590 ಜನರ ರಕ್ತ ಪರೀಕ್ಷೆಯನ್ನು ಮಾಡಲಾಗಿದ್ದು, ಅವುಗಳಲ್ಲಿ 1414 ಪ್ರಕರಣಗಳು ಕಂಡುಬಂದಿವೆ. ಅಗತ್ಯವಿರುವ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದ ಅವರು, ಕ್ಷಯರೋಗಿಗಳಿಗೆ ಅಗತ್ಯವಿರುವ ಪೌಷ್ಠಿಕ ಆಹಾರಗಳನ್ನು ಒದಗಿಸಲು ಸಹಾಯಧನವನ್ನು ಸ್ಥಳೀಯ ಗ್ರಾಮ ಪಂಚಾಯತಿಗಳು ನೀಡಬೇಕು. ನಿಕ್ಷಯ್ ಪೋಷಣಾ ಯೋಜನೆಯ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 3717 ನಾಯಿ ಕಚ್ಚಿದ ಹಾಗೂ 70 ಹಾವು ಕಚ್ಚಿದ ಪ್ರಕರಣಗಳಾಗಿ 3 ಜನ ಹಾವು ಕಚ್ಚಿರುವುದರಿಂದ ಮರಣಹೊಂದಿರುತ್ತಾರೆ. ನಾಯಿಯ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಆದ್ಯತೆಯ ಮೇಲೆ ಕೈಗೊಂಡು ಅವುಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದ ಅವರು, ರೇಬೀಸ್ ಹೊಂದಿರುವ ನಾಯಿಗಳು ಮರಣ ಹೊಂದಿದ್ದಲ್ಲಿ ಹಾಗೂ ಹುಚ್ಚು ನಾಯಿ ಕಡಿತದಿಂದ ಮರಣ ಹೊಂದಿದ ಇತರೆ ಜಾನುವಾರುಗಳನ್ನು ಆಳವಾಗಿ ಗುಂಡಿ ತೆಗೆದು ಹೂಳುವಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದರು.
ಸಾಮಾನ್ಯವಾಗಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚು ಉಷ್ಣಾಂಶ ವಾತಾವರಣ ಇರುವಂತಹ ಸಂದರ್ಭದಲ್ಲಿ ಕಂಡುಬರುತ್ತವೆ. ಕಾಡಂಚಿನಲ್ಲಿ ವಾಸಿಸುವ ಜನರಿಗೆ ಈ ಕಾಯಿಲೆ ಹರಡುವ ಬಗ್ಗೆ ಅರಿವು ಮೂಡಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿ.ಡಿ.ಓ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಮನ್ವಯ ಸಮಿತಿಯ ಸಭೆಗಳನ್ನು ನಡೆಸಿ, ರೋಗ ಹರಡದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಈವರೆಗೆ ಯಾವುದೇ ರೀತಿಯ ಹಕ್ಕಿ ಜ್ವರದ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರಕರಣಗಳು ಕಂಡುಬಂದಿವೆ. ಜನರಲ್ಲಿ ಹಕ್ಕಿ ಜ್ವರದ ನಿಯಂತ್ರಣದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದ ಅವರು, ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ, ಕೋಳಿ ಫಾರಂ ಗಳಿಗೆ ಭೇಟಿ ನೀಡಿ, ಪರಿಶೀಲನೆಗಳನ್ನು ಆಗಿಂದಾಗ್ಗೆ ಮಾಡಬೇಕು. ಹಂದಿಜ್ವರದ ಬಗ್ಗೆಯೂ ಸಹ ಕ್ರಮವಹಿಸಬೇಕು ಎಂದರು.
ತಂಬಾಕು ಉತ್ಪನ್ನಗಳು ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಮಾರಾಟ ಮಾಡುವುದು ನಿರ್ಬಂಧವಿದೆ. ಇವುಗಳನ್ನು ಉಲ್ಲಂಘನೆ ಮಾಡಿದ ಮಣಿಪಾಲದ ವ್ಯಾಪ್ತಿಯಲ್ಲಿ 11 ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲಾಗಿದೆ. ಕೋಟ್ಪಾ ದಾಳಿ ವೇಳೆ ಈ ಪ್ರಕರಣಗಳು ಕಂಡುಬಂದಲ್ಲಿ ತಪ್ಪದೇ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಬೇಕು. ಬೈಂದೂರು-ಭಟ್ಕಳ ತಾಲೂಕಿನ ಗಡಿ ಭಾಗದ ಕೆಲವು ಪ್ರದೇಶಗಳಲ್ಲಿ ಕೋಟ್ಪಾ ಕಾಯಿದೆ ಉಲ್ಲಂಘನೆ ಪ್ರಕರಣಗಳು ಹೆಚ್ಚು ಕಂಡುಬರರುತ್ತಿವೆ. ಇವುಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ “ಕೂಲ್ ಲಿಪ್” ಮೌತ್ ಫ್ರೆಶ್ನರ್ ಉತ್ಪನ್ನವು ಮೇಲ್ನೋಟಕ್ಕೆ ನೈಜವಾಗಿ ತಂಬಾಕು ಉತ್ಪನ್ನವೇ ಆಗಿದ್ದು, ಇವುಗಳ ಬಗ್ಗೆ ಜಾಹೀರಾತು ಪ್ರಚಾರ ಪಡಿಸುವುದು ಹಾಗೂ ಮಕ್ಕಳಿಗೆ ಮಾರಾಟವನ್ನು ಮಾರಾಟಗಾರರು ಮಾಡುವ ಹಾಗಿಲ್ಲ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದರು.
ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿದ ಸ್ಕ್ಯಾನಿಂಗ್ ಸೆಂಟರ್ಗಳ ಅನುಮತಿಯನ್ನು ರದ್ದುಪಡಿಸಬೇಕು ಎಂದ ಅವರು, ಕಾನೂನು ಬಾಹಿರವಾಗಿ ಭ್ರೂಣಲಿಂಗ ಪತ್ತೆ ಹಚ್ಚುವ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ವರೆಗೆ ಬಹುಮಾನ ನೀಡಲಾಗುವುದು ಎಂದರು.
ಜಿಲ್ಲೆಯ ಹೊರಭಾಗದಿಂದ ಹೆಚ್ಚು ಜನ ಚಿಕಿತ್ಸೆಗೆ ಬರುತ್ತಾರೆ. ಅಲ್ಲದೆ ನೆರೆ ಜಿಲ್ಲೆಯವರು ರಕ್ತದ ಬೇಡಿಕೆಯನ್ನು ಮಾಡುತ್ತಾರೆ. ಅದಕ್ಕನುಗುಣವಾಗಿ ರಕ್ತನಿಧಿ ಕೇಂದ್ರಗಳಲ್ಲಿ ಜಿಲ್ಲೆಯಲ್ಲಿ ತುರ್ತು ರಕ್ತದ ಅವಶ್ಯಕತೆ ಅನುಗುಣವಾಗಿ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದ ಅವರು, ರಕ್ತದಾನ ಕೇಂದ್ರಕ್ಕೆ ಅಗತ್ಯವಿರುವ ಪರಿಕರಗಳು ಹಾಗೂ ವಾಹನದ ವ್ಯವಸ್ಥೆಯನ್ನು ಹೊಂದಲು ಅನುಮತಿ ಪಡೆದು ಅವುಗಳನ್ನು ಹೊಂದಬೇಕು ಎಂದರು.
ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿ, ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈಗಿನಿಂದಲೇ ಇವುಗಳ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದದ ಕ್ರಮಗಳ ಬಗ್ಗೆ ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಮೂಡಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಯುವಜನರೇ ಹೆಚ್ಚು ಹೆಚ್ಚು ಆತ್ಮಹತ್ಯೆ ಪ್ರಕರಣಗಳಲ್ಲಿ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸಾವಿನ ನಿಖರ ಕಾರಣವನ್ನು ಕ್ರೋಢೀಕರಿಸಿ, ಇವುಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿ.ಎಸ್.ಓ ಡಾ. ನಾಗರತ್ನ, ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ಜನ್ ಡಾ. ಹೆಚ್ .ಅಶೋಕ್, ಕೆ.ಎಂ.ಸಿ.ಯ ತಜ್ಞ ವೈದ್ಯರಾದ ಡಾ. ಲೆಸ್ಸಿ ಲೂಯಿಸ್, ಡಾ. ಶಂಕರ ಬಕ್ಕಣ್ಣ, ಡಾ. ರಾಜೇಶ್ವರಿ, ಡಾ. ಯಶ್ ಅಲೋಕ್, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಐ.ಎಂ.ಎ ಹಾಗೂ ಐ.ಎ.ಪಿ ಅಧ್ಯಕ್ಷರುಗಳು, ಪ್ರಸೂತಿ ಹಾಗೂ ಮಕ್ಕಳ ತಜ್ಞರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.