ಉಡುಪಿ: ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ಸುಮಾರು 12 ಶತಮಾನದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ಸಮಾನತೆಗಾಗಿ ಹೋರಾಡುವ ಮೂಲಕ ನಾಡು ನುಡಿಗಾಗಿ ಸಲ್ಲಿಸಿದ ಸೇವೆ ಶ್ಲಾಘನೀಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.
ಅವರು ನಗರದ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿವಶರಣ ಹಡಪದ ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.
ದಾರ್ಶನಿಕರು ವಚನಗಳ ಮೂಲಕ ಬದುಕಿಗೆ ಮಾರ್ಗದರ್ಶನವನ್ನು ನೀಡಿದ್ದು, ವಿದ್ಯಾರ್ಥಿಗಳು ಅವುಗಳನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಆಳವಡಿಸಿಕೊಂಡು, ವಿವಿಧತೆಯನ್ನು ಕಂಡ ನಾಡಿನಲ್ಲಿ ಒಳ್ಳೆಯ ಪ್ರಜೆಯಾಗಿ ಜೀವನ ನಡೆಸಿ, ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದರು.
ಡಾ.ಟಿ.ಎಂ.ಎ ಪೈ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಹಾಬಲೇಶ್ವರ ರಾವ್ ಮಾತನಾಡಿ, ವಚನಕಾರರು ಕಾಯಕವೇ ಶ್ರೇಷ್ಠವಾದದ್ದು, ಕಾಯಕದಲ್ಲಿ ಮೇಲು ಕೀಳು ಎಂಬ ಯಾವುದೇ ತಾರತಮ್ಯವಿಲ್ಲ, ಎಲ್ಲಾ ಕಾಯಕಗಳು ಸಮಾನತೆಯ ಒಟ್ಟು ಬಾಳ್ವೇಗೆ ಪೂರಕವಾಗಿದೆ ಎಂಬುವುದನ್ನು ತಿಳಿಸುವ ಮೂಲಕ ಶ್ರಮ ಗೌರವದ ತತ್ವವನ್ನು ಪ್ರತಿಪಾದಿಸಿದವರು ಎಂದ ಅವರು, ಯುವ ಪೀಳಿಗೆಯು ವಚನಗಳನ್ನು ಓದುವ ಮೂಲಕ ಅದರಲ್ಲಿರುವ ಮೌಲ್ಯ ಶಿಕ್ಷಣವನ್ನು ತಿಳಿದುಕೊಳ್ಳಬೇಕು ಎಂದರು.
ಸಾಂಸ್ಕೃತಿಕ ಚಿಂತಕ ಡಾ. ಶ್ರೀಕಾಂತ್ ಸಿದ್ದಾಪುರ ಶಿವಶರಣ ಹಡಪದ ಅಪ್ಪಣ್ಣರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಶಿವಶರಣ ಹಡಪದ ಅಪ್ಪಣ್ಣ ಅವರ ಸಿದ್ದಾಂತದಂತೆ ಪ್ರತಿಯೊಬ್ಬರು ತಮ್ಮ ಕಾಯಕದ ಕುರಿತು ಯಾವುದೇ ಕೀಳರಿಮೆ ಇಲ್ಲದೇ ಗೌರವ ಮತ್ತು ಪ್ರಾಮಾಣಿಕತೆ ಹೊಂದಿದಾಗ ಮಾತ್ರ ಬದುಕಿನಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಮಾಜದಲ್ಲಿದ್ದ ಅಸಮಾನತೆ, ಅಸ್ಪಶ್ಯತೆ ಮೂಢನಂಬಿಕೆಯನ್ನು ಹೋಗಲಾಡಿಸಿ ಸಾಮಾಜಿಕ ಬದಲಾವಣೆಗಳಿಗಾಗಿ ಶ್ರಮಿಸಿದ ಶಿವಶರಣ ಹಡಪದ ಅಪ್ಪಣ್ಣ ರವರ ಬದುಕು ಆದರ್ಶಮಯ ಸಿದ್ದಾಂತ ನಮ್ಮೆಲ್ಲರಿಗೂ ಸ್ಪೂರ್ತಿ ಮತ್ತು ಮಾದರಿ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ತೇಜಸ್ ಜೆ ಬಂಗೇರ ನಿರೂಪಿಸಿ ವಂದಿಸಿದರು.