ಉಡುಪಿ, ಮಾರ್ಚ್ 14: ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಾರೆ. ಇವುಗಳಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು.
ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಯುವ ರೆಡ್ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಯುವಜನರು ಅರಿವಿಲ್ಲದೆ ಕ್ಷಣಿಕ ಸುಖಕ್ಕಾಗಿ ಮದ್ಯ ಅಥವಾ ಮಾದಕ ವಸ್ತುಗಳಿಗೆ ಬಲಿಯಾಗಿ ಅವುಗಳ ಸುಳಿಯಿಂದ ಹೊರಬರಲಾಗದೇ ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆ ತಮ್ಮ ಭವ್ಯ ಭವಿಷ್ಯವನ್ನು ಹಾಳು ಮಾಡಿಕೊಳ್ಳುವುದರ ಜೊತೆಗೆ ಸಮಾಜದಲ್ಲಿ ತಲೆ ಎತ್ತಿ ಓಡಾಡದ ಹಾಗೆ ಮಾಡಿಕೊಳ್ಳುತ್ತಾರೆ. ಇದಕ್ಕೆ ಯಾರೊಬ್ಬರೂ ಆಸ್ಪದ ನೀಡಬಾರದು ಎಂದರು.
ಯುವಜನರು ತಮ್ಮ ಭವಿಷ್ಯದ ಬದುಕಿನ ಬಗ್ಗೆ ಚಿಂತಿಸಿ, ಅದನ್ನು ಸಾಧಿಸುವ ದಾರಿಯಲ್ಲಿ ಸಾಗಬೇಕು. ಯಾರೊಬ್ಬರ ಪ್ರೇರಣೆಗಳಿಗೆ ಬಲಿಯಾಗಿ ದುಶ್ಚಟಗಳಿಗೆ ವ್ಯಸನರಾಗಬಾರದು. ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಹದಗೆಡುವುದರ ಜೊತೆಗೆ ಹೃದಯರೋಗ, ಕ್ಯಾನ್ಸರ್ನಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗಿ ಅಕಾಲಿಕ ಮರಣಗಳು ಉಂಟಾಗುವ ಸಾಧ್ಯತೆಗಳು ಇರುತ್ತವೆ ಎಂದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕಾರ್ಯವನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕೈಗೊಳ್ಳುತಿವೆ. ಇದಕ್ಕೆ ಪೂರಕವಾಗಿ ಶಿಕ್ಷಣ, ರೈಲ್ವೆ, ಅಂಚೆ ಸೇರಿದಂತೆ ಮತ್ತಿತರ ಇಲಾಖೆಗಳು ಕೈಜೋಡಿಸಿವೆ. ಶಿಕ್ಷಕರು ವಿದ್ಯಾರ್ಥಿಗಳ ಚಲನವಲನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದ ಅವರು, ಸಹ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾದಾಗ ಈ ಬಗ್ಗೆ ಶಿಕ್ಷಕರು ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವುದು ಸೂಕ್ತ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯು ದೇಹವನ್ನು ಸೇರುವುದರಿಂದ ಮಾನಸಿಕ ಆರೋಗ್ಯ, ಮನೋಭಾವನೆ, ಚಿಂತನೆ ಅವರ ಸೀಮಿತದಲ್ಲಿ ಇರುವುದಿಲ್ಲ. ವ್ಯಕ್ತಿಯ ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಡುವುದರೊಂದಿಗೆ ಸಮಾಜದಲ್ಲಿ ಯಾರೂ ಸಹ ಗೌರವ ಭಾವನೆಯಿಂದ ನೋಡುವುದಿಲ್ಲ. ಜೊತೆಗೆ ಲಿವರ್, ಕಿಡ್ನಿ, ಮೆದುಳು ಸೇರಿದಂತೆ ಮತ್ತಿತರ ಆರೋಗ್ಯ ಸ್ಥಿತಿಯಲ್ಲಿ ಅಸಮಾನತೆ ಉಂಟಾಗುವುದರೊಂದಿಗೆ ಮಾದಕ ವ್ಯಸನಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವವರನ್ನು ಕಾಣಬಹುದಾಗಿದೆ ಎಂದ ಅವರು, ದೇಶದ ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವ ಸಂಪತ್ತನ್ನು ಕಾಣಬಹುದಾಗಿದೆ. ಯುವಪೀಳಿಗೆ ನಮ್ಮ ಆರ್ಥಿಕ ಪ್ರಗತಿಯನ್ನು ಉನ್ನತಗೊಳಿಸಲು ಕಾರಣೀಕರ್ತರಾಗಬೇಕು. ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು, ಸಮಾಜದಲ್ಲಿ ಅರಿವು ಮೂಡಿಸುವುದರೊಂದಿಗೆ ಮಾದಕ ವಸ್ತುಗಳಂತಹ ವಿಷಕಾರಿ ವಸ್ತುಗಳಿಂದ ದೂರವಿರಬೇಕು ಎಂದರು.
ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ. ವಾಸುದೇವ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ದುಶ್ಚಟಗಳು ಒಂದು ರೀತಿಯ ಕಾಯಿಲೆಯಾಗಿದ್ದು, ಸಾಮಾಜಿಕ ವ್ಯವಸ್ಥೆ, ಕುಟುಂಬದ ಸಮಸ್ಯೆ, ಒತ್ತಡಗಳು, ಹದಿಹರೆಯದಲ್ಲಿ ದೇಹದಲ್ಲಿ ಆಗುವ ಬದಲಾವಣೆ, ಖಿನ್ನತೆಯಿಂದ ಹೊರಬರಲು, ನಿರುದ್ಯೋಗ ಸಮಸ್ಯೆ ಸೇರಿದಂತೆ ಮತ್ತಿತರ ಕಾರಣಗಳಿಂದ ಯುವಪೀಳಿಗೆಯು ದುಶ್ಚಟಗಳಿಗೆ ದಾಸರಾಗುತ್ತಾರೆ. ಮದ್ಯಪಾನ, ಧೂಮಪಾನ, ಗಾಂಜಾ, ಬ್ರೌನ್ ಶುಗರ್, ಸೇರಿದಂತೆ ಮತ್ತಿತರ ಮಾದಕ ವಸ್ತುಗಳ ಸೇವನೆಯಿಂದ ದೇಹದ ಕೆಲವು ಅಂಗಾಗಂಗಳು ನಿಷ್ಕ್ರೀಯವಾಗಲು ಕಾರಣವಾಗುತ್ತವೆ. ವ್ಯಸನಕ್ಕೆ ಒಳಗಾದವರನ್ನು ದೂರದೇ ಅವರುಗಳನ್ನು ಉತ್ತಮ ನಾಗರಿಕರನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು. ಆರೋಗ್ಯಕರ ವಿಷಯಗಳಿಗೆ ಅಗತ್ಯವಿದ್ದಲ್ಲಿ ಮಾತ್ರ ಮೊಬೈಲ್ ಅನ್ನು ಬಳಸಬೇಕು. ನಾವು ಜಾಗೃತರಾಗುವುದರೊಂದಿಗೆ ನಮ್ಮ ಮೆದುಳುಗಳಿಗೆ ಕೆಲಸ ನೀಡುವುದರಿಂದ ಮೆದುಳು ಚುರುಕಾಗಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ದೈಹಿಕ ವ್ಯಾಯಾಮ, ಯೋಗ ಸೇರಿದಂತೆ ದಿನನಿತ್ಯ ದೈಹಿಕ ಚಟುವಟಿಕೆಗಳನ್ನು ರೂಪಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸುಗಳಿಸುವುದರೊಂದಿಗೆ ದುಶ್ಚಟಗಳಿಂದ ದೂರವಿರಲು ಸಾಧ್ಯ ಎಂದ ಅವರು, ವ್ಯಸನಗಳಿಗೆ ತುತ್ತಾದ ವ್ಯಕ್ತಿಗಳನ್ನು ಒಳ್ಳೆಯ ದಾರಿಗೆ ತರುವಲ್ಲಿ ಹಾಗೂ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ ರಾಮರಾವ್ ಮಾತನಾಡಿ, ಯುವಪೀಳಿಗೆ ಡ್ರಗ್ಸ್, ಆಲ್ಕೋಹಾಲ್ ಸೇರಿದಂತೆ ಮತ್ತಿತರ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಇದು ಸಮಾಜದವರೊಂದಿಗೆ ತನ್ನ ಕುಟುಂಬವನ್ನು ಹಾಳು ಮಾಡುತ್ತದೆ. ಇಂತಹ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಸಮಾಜ ನಿರ್ಮಾಣದತ್ತ ತಮ್ಮ ಹೆಜ್ಜೆ ಇಡಬೇಕು. ಎಂದು ವಾಸ್ತವಿಕ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನವನ್ನು ಸಾಮಾಜಿಕ ಜೀವನದಿಂದ ನಿರ್ಮೂಲನೆ ಮಾಡಲು ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸಮಾಜಸೇವೆಯಂತಹ ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಗಿರೀಶ್ ನಾವಡ ಹಾಗೂ ತಂಡದವರಿಂದ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಂಗೀತ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ಕ್ರಾಸ್ ಘಟಕದ ಸಂಚಾಲಕ ಪ್ರಶಾಂತ್ ಎನ್ ನಿರೂಪಿಸಿದರೆ, ಇಲಾಖೆಯ ಸಿಬ್ಬಂದಿ ಸುಚಿತ್ರಾ ವಂದಿಸಿದರು.