ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.



ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೂಡಬಿದ್ರೆಯ ಆಳ್ವಾಸ್ ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿಭಾಗ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಅವರು ಆಗಮಿಸಿದ್ದರು. ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು “ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶ ಹಾಗೂ ಉನ್ನತ ಸಾಧನೆಗೆ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದನ್ನು ಬಳಸಿಕೊಂಡು ಸಮಾಜದಲ್ಲಿ ಉನ್ನತಿಗೇರಬೇಕು. ಪತ್ರಿಕೆಗಳಲ್ಲಿ ಬರುವ ಸುದ್ದಿಗಳು ಅತ್ಯಂತ ವಿಶ್ವಾಸಾರ್ಹವಾಗಿರುತ್ತವೆ. ಪತ್ರಿಕೆಗಳನ್ನು ಓದುವುದರಿಂದ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುತ್ತದೆ, ಪತ್ರಿಕೆಗಳು ಇಲ್ಲದ ಊರು ಕಿಟಕಿಗಳಿಲ್ಲದ ಮನೆಯಂತೆ, ಆದ್ದರಿಂದ ವಿದ್ಯಾರ್ಥಿಗಳು ನಿರಂತರ ಪತ್ರಿಕೆಗಳನ್ನು ಓದಬೇಕು” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ “ಈ ಸಮಾಜದಲ್ಲಿ ಧ್ವನಿಯಿಲ್ಲದವರ ಧ್ವನಿಯಾಗಿರುವವ ಪತ್ರಕರ್ತರಿಗೆ ಹೆಚ್ಚಿನ ಗೌರವವಿದೆ. ಅಪರಾಧ ಕೃತ್ಯಗಳು ಕಡಿಮೆಯಾಗಲು ಪತ್ರಿಕೆ ಮತ್ತು ಸುದ್ದಿ ಮಾಧ್ಯಮದವರ ಕೊಡುಗೆ ಅಪಾರ. ಪತ್ರಕರ್ತರು ಸಮಾಜದ ತಪ್ಪು ಒಪ್ಪುಗಳನ್ನು ತಿದ್ದುವ ಮೂಲಕ ಸುಸ್ಥಿರ ಸಮಾಜ ನಿರ್ಮಿಸಲು ಪ್ರಯತ್ನಿಸುತ್ತಿದ್ದು ಇಂತವರು ನಿಜವಾಗಿಯೂ ಅಭಿನಂದನಾರ್ಹರು” ಎಂದು ಹೇಳಿದರು.
ಇನ್ನೋರ್ವ ಅತಿಥಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಮ್ಮದ್ ಷರೀಫ್ ಅವರು ಮಾತನಾಡಿ “ಇಂದು ಪತ್ರಿಕಾ ಮಾಧ್ಯಮಗಳಿಗೆ ಬರುವ ಯುವಜನರ ಸಂಖ್ಯೆ ಕಡಿಮೆಯಾಗಿದೆ. ಯುವಜನತೆ ಸುದ್ದಿ ಮಾಧ್ಯಮ, ಪತ್ರಿಕೋದ್ಯಮಗಳ ಕಡೆ ಆಕರ್ಷಿತರಾಗಬೇಕು. ಪತ್ರಿಕೋದ್ಯಮ ಎನ್ನುವುದು ಅಪಾರ ಜೀವನಾನುಭವ ನೀಡುವ ಕ್ಷೇತ್ರವಾಗಿದೆ” ಎಂದು ಹೇಳಿದರು. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಧ್ಯಮಬಿಂಬ ಪತ್ರಿಕೆಯ ಸಂಪಾದಕರಾದ ವಸಂತ ಕುಮಾರ್ ಅವರು ಮಾತನಾಡಿ “ಸಮಾಜವನ್ನು ಜಾಗೃತಗೊಳಿಸುವ ಪತ್ರಕರ್ತರು ಸದಾ ಎಚ್ಚರಿಕೆಯಿಂದ ಇರಬೇಕು. ಇನ್ನೊಬ್ಬರ ತಪ್ಪು ತಿದ್ದುವಾಗ ನಮ್ಮ ನಡೆನುಡಿಯು ಪ್ರಾಮಾಣಿಕವಾಗಿರಬೇಕು. ಪತ್ರಕರ್ತರಾಗುವವರು ಕ್ಷೇತ್ರ ಭೇಟಿಯ ಕಾರ್ಯದಲ್ಲಿ ತೊಡಗಿಸಿಕೊಂಡಾಗ ಕ್ರೀಯಾಶೀಲ ಪತ್ರಕರ್ತರಾಗುವುದರ ಜೊತೆಗೆ ಉತ್ತಮ ಜೀವನ ಅನುಭವ ದೊರೆಯುತ್ತದೆ” ಎಂದು ಹೇಳಿದರು. ನ್ಯೂಸ್ ಕಾರ್ಕಳ ವೆಬ್ ಮಾಧ್ಯಮದ ವ್ಯವಸ್ಥಾಪಕ ಸಂಪಾದಕರಾದ ರಾಮಚಂದ್ರ ಬರೆಪ್ಪಾಡಿ ಅವರನ್ನು ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ರಾಮಚಂದ್ರ ಅವರು ತಮ್ಮ ಪತ್ರಕರ್ತ ಜೀವನದ ಅನುಭವವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಅವರು ಪ್ರಸ್ತಾವನೆ ಗೈದರು. ಉಪ ಪ್ರಚಾರ್ಯ ಡಾ. ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಐ ಕ್ರಿಸ್ಟೋಫರ್ ಕೋಟ್ಯಾನ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
